ಶುಕ್ರವಾರ, ಮೇ 1, 2026

ನಾಗಶಾಪದ ಮುಕ್ತಿ

✍🏻ದೀಪಲಕ್ಷ್ಮಿ ಭಟ್, ಮಂಗಳೂರು 

ಬೇಸಿಗೆಯ ಬಿಸಿಲು ತೀವ್ರವಾಗಿದ್ದರೂ, ಹಳ್ಳಿಯ ಸೊಗಸು ಎಂದಿಗೂ ಕಡಿಮೆಯಾಗುವುದಿಲ್ಲ. ಹಸಿರು ಹೊಲಗಳು, ಮಳೆಯ ವಾಸನೆ ಉಳಿಸಿಕೊಂಡ ಮಣ್ಣು,  ಮಂಗಳವಾದ ಮುಸ್ಸಂಜೆಯ ಗಾಳಿ—ಇವುಗಳ ನಡುವೆ ತನ್ನ ರಜೆಯನ್ನು ಕಳೆಯಲು ವಿಕ್ರಮ ತನ್ನ ಅತ್ತೆ ವಿಮಲಾಳ ಮನೆಗೆ ಬಂದಿದ್ದ. 

ವಿಕ್ರಮ ಇಂಜಿನಿಯರಿಂಗ್ ಮೂರನೇ ವರ್ಷದ ವಿದ್ಯಾರ್ಥಿ. ಚತುರ, ಧೈರ್ಯಶಾಲಿ ಮತ್ತು ಮನಸಾರೆ ಪ್ರೀತಿಸುವ ಸ್ವಭಾವದವನು. ಅವನಿಗೆ ತನ್ನ ಅತ್ತೆ ಮಗಳು ವಿನುತಾಳ ಮೇಲೆ ವಿಶೇಷವಾದ ಮಮತೆ. ಆ ಮಮತೆ, ಪ್ರೀತಿಯಾಗಿ ಅರಳಿತ್ತು. ವಿನುತಾಳಿಗೂ ಅವನೆಂದರೆ ಪ್ರಾಣವೇ.

ವಿನುತಾ, ಹತ್ತನೇ ತರಗತಿಯ ಪರೀಕ್ಷೆ ಮುಗಿಸಿ, ರಜೆಯಲ್ಲಿದ್ದಳು. ಅವಳ ಸುಂದರವಾದ ಮಂದಹಾಸ, ಅವಳ ಕಣ್ಣುಗಳಲ್ಲಿನ ಹೊಳಪು — ಎಲ್ಲವೂ ವಿಕ್ರಮನ ಮನಸ್ಸನ್ನು ಸೆಳೆದಿದ್ದವು.

ವಿಮಲಾ, ವಿನೋದ ದಂಪತಿಗಳಿಗೂ, ವಿಕ್ರಮನೆಂದರೆ ತುಂಬಾ ಪ್ರೀತಿ. ವಿಕ್ರಮನ ಹೆತ್ತವರಾದ ವಿಜಯ ಹಾಗೂ ಅನುರಾಧ ಕೂಡ ಈ ಸಂಬಂಧಕ್ಕೆ ಮೊದಲೇ ಸೈ ಅಂದಿದ್ದರು. ಇವರಿಬ್ಬರ ಸಂಬಂಧವನ್ನು ಎರಡೂ ಕುಟುಂಬದವರು ಕೂಡ ಮನಸಾರೆ ಒಪ್ಪಿಕೊಂಡಿದ್ದರು. ಹೀಗಾಗಿ ಅವರು ಒಟ್ಟಿಗೆ ಹೊಲಗಳಲ್ಲಿ ತಿರುಗಾಡುವುದು, ಸಂಜೆಯ ಹೊತ್ತಿನಲ್ಲಿ ಮಾತುಕತೆ ನಡೆಸುವುದು ಎಲ್ಲವೂ ಸಾಮಾನ್ಯವಾಗಿತ್ತು.  "ವಿಕ್ಕಿ... ನನ್ ಜೊತೆ ಟ್ರೀ ಹೌಸ್ ಗೆ ಬಾ.." ಅಂತ ಹೇಳಿ, ವಿನುತಾ ವಿಕ್ರಮನ  ಜೊತೆ, ಚಿಕ್ಕಂದಿನಿಂದಲೂ, ಅವಳಿಗೆ ಆಟವಾಡಲೆಂದೇ ವಿನೋದ ಕೈಯಾರೆ ತಯಾರಿಸಿದ್ದ ಮರದ ಮೇಲಿನ ಟ್ರೀ ಹೌಸ್  ಒಳಗೆ ಕೂತು ಆಟ ಆಡುತ್ತಿದ್ದರು. ಹಾಗೆ, ಆಟವಾಡಿ ಸುಸ್ತಾದರೆ, ಅದರಲ್ಲೇ ಮಲಗುತ್ತಿದ್ದರು.  ದೊಡ್ಡವರಾದ ಮೇಲೂ ಈ ರೀತಿ ಟ್ರೀ ಹೌಸ್ ನಲ್ಲಿ ಕೂತು ಹರಟೆ ಹೊಡೆಯುತ್ತಾ ಕಾಲ ಕಳೆಯೋದು ಅವರಿಬ್ಬರಿಗೂ ಇಷ್ಟವಾದ ವಿಷಯವಾಗಿತ್ತು. 

*** 

 

ಅಂದು ಪಂಚಮಿಯ ದಿನ. ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮುಗಿಸಿದ ವಿನುತಾ, ಮನೆಯೆದುರು ರಂಗೋಲಿ ಬಿಡಿಸಿ, ದೇವರ ಪೂಜೆಗೆಂದು ಹೂ ಕೊಯ್ದು,  ಅಮ್ಮ ಮಾಡಿ ಕೊಟ್ಟ ಕಾಫಿ ಕುಡಿಯುತ್ತಿದ್ದಳು. ಆಗ ತಾನೇ ಎಡ್ಡಾ ವಿಕ್ರಮ, ವಿನುತಾಳನ್ನು ಎಡ್ಡಾ ಕೂಡಲೇ ನೋಡಿ ಮನದಲ್ಲೇ ಸಂತೋಷಗೊಂಡು, ತನ್ನ ಬೆಳಗಿನ ದಿನಚರಿ ಮುಗಿಸಿದ. ತಿಂಡಿ ತಿಂದಾದಮೇಲೆ. ವಿನುತಾ ವಿಕ್ರಮ್  ಇಬ್ಬರೂ ಟ್ರೀ ಹೌಸ್ ಕಡೆ ಹೋದರು. ಹೊಲದಲ್ಲೆಲ್ಲಾ ಸುತ್ತಾಡಿ, ತಮ್ಮ ಶಾಲೆ ಕಾಲೇಜಿನ ಕಥೆಗಳನ್ನು ಮಾತನಾಡುತ್ತಾ, ಸುಸ್ತಾದ ಹಾಗೆ ಟ್ರೀ ಹೌಸ್ ಒಳಗೆ ಹೋಗಿ ತಾವು ತಂದಿದ್ದ ಜ್ಯೂಸು ಕುಡಿದು ಹರಟೆಗೆ ಕೂತರು.  ವಿಕ್ರಮ ಕಾಲೇಜಿನಲ್ಲಿ ಪ್ರೀತಿಸುತ್ತಿದ್ದ ಒಂದೆರಡು ಜೋಡಿಗಳ ಕಥೆ ಹೇಳಿದರೆ, ವಿನುತಾ ಶಾಲೆಯಲ್ಲಿ ಪಾಠ ಕಲಿಸುತ್ತಿದ್ದ ಮೇಷ್ಟ್ರುಗಳ ಮೇಲೆ ಕೆಲವೊಂದು ಹುಡುಗಿಯರಿಗಿದ್ದ ಕ್ರಶ್ ಬಗ್ಗೆ ಹೇಳುತ್ತಿದ್ದಳು. ಮಾತು ಮಾತಿಗೂ ಅವಳ ನಗು ವಿಕ್ರಮನ ಮನಸ್ಸಿಗೆ ತಂಪೆರೆಯುತ್ತಿತ್ತು. ಹಾಗೆ ಅವಳನ್ನು ನೋಡಿ ಅವಳನ್ನು ಬರಸೆಳೆದು ಅವಳ ಹಣೆಗೆ ಹಾಗೂ ಕೆನ್ನೆಗೆ ಒಂದು ಸುಂದರವಾದ ಮುತ್ತಿಟ್ಟು ಮನೆಗೆ ಹೋಗುತ್ತೇನೆಂದು ಹೊರಟ. ಅಚಾನಕ್ಕಾಗಿ ಸಿಕ್ಕ ಮುತ್ತಿನಿಂದ ಪುಳಕಿತಳಾದ ವಿನುತಾ ಕೆನ್ನೆಯೆಲ್ಲ ನಾಚಿಕೆಯಿಂದ ಕೆಂಪಗಾಗಿತ್ತು.  ಆ ಮುತ್ತಿನ ಗುಂಗಿನಲ್ಲೇ ಕೆಲಕಾಲ ಮುಗುಳ್ನಗೆಯಲ್ಲಿ ಕಳೆದಳು. ಆಮೇಲೆ ನಿಧಾನಕ್ಕೆ ಟ್ರೀ ಹೌಸ್ ನಿಂದ ಕೆಳಗಿಳಿದು ಮನೆಗೆ ಹೋದಳು.

ಆ ರಾತ್ರಿ - ಪಂಚಮಿಯ ರಾತ್ರಿ. ವಿಚಿತ್ರವಾದ ನಿಶಬ್ದದಿಂದ ಕೂಡಿತ್ತು.  ಎಲ್ಲರೂ ರಾತ್ರಿ ಊಟ ಮುಗಿಸಿ ಮಲಗಲು ತಯಾರಾಗುತ್ತಿದ್ದರು. "ವಿಕ್ರಮ, ನಾಳೆ ಷಷ್ಠಿ ಆದ ಕಾರಣ, ನಮ್ಮೂರಿನ ದೇವಸ್ಥಾನಕ್ಕೆ ಹೋಗಿ ನಾಗನ ಕಲ್ಲಿಗೆ ಹಾಲೆರೆಯಲು ಹೋಗಲಿಕ್ಕಿದೆ. ಬೆಳಿಗ್ಗೆ ಬೇಗನೆ ತಯಾರಾಗು." ಅಂತ ವಿಮಲಾ ನೆನಪಿಸಿದಳು. "ಸರಿ ಅತ್ತೆ. ಬೆಳಿಗ್ಗೆ ಬೇಗನೆ ತಯಾರಾಗ್ತೇನೆ" ಅಂದು ವಿಕ್ರಮ ತನ್ನ ಕೋಣೆಗೆ ಹೋದ. ಎಲ್ಲ ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಟ್ಟು ವಿಮಲಾ ಕೂಡ ತನ್ನ ಕೊನೆಗೆ ಹೋಗಿ ಮಲಗಿದಳು. ಸುಮಾರು ಅರ್ಧರಾತ್ರಿಯ ಸಮಯ. ವಿಕ್ರಮ ಗಾಢವಾದ ನಿದ್ರೆಯಲ್ಲಿದ್ದ. ಏಕಾಏಕಿಯಾಗಿ ಒಂದು ವಿಚಿತ್ರವಾದ ಸಡ್ಡು ಕೇಳಿಸಿ ವಿಕ್ರಮ ಎಚ್ಚರಗೊಂಡ. 

ಆ ಸಡ್ಡು ವಿನುತಾಳ ಕೊನೆ ಕಡೆಯಿಂದ ಕೇಳಿಸಿದಂತೆ ಭಾಸವಾಯಿತು. ಭೀತಗೊಂಡ ವಿಕ್ರಮ ಎದೆ ತಡಕಾಡುತ್ತಾ ತನ್ನ ಕೋಣೆಯಿಂದ ಹೊರಬಂದ. ಆ ಸಮಯಕ್ಕೆ ವಿನುತಾಳ ಕೋಣೆಯ ಕಡೆಯಿಂದ ಹೊರಬಂದ ದೊಡ್ಡ ನಗರಹಾವೊಂದು ಹೊರಗೆ ಹೋಗುತ್ತಿತ್ತು. ಮತ್ತಷ್ಟು ಭಯಗೊಂಡ ವಿಕ್ರಮ ವಿನುತಾಳ ಕೋಣೆ  ಕಡೆ ಓಡಿದ. ಮೃದುವಾದ ದನಿಯಲ್ಲಿ "ವಿನುತಾ" ಎಂದು ಕರೆದ. ಮೆಲ್ಲನೆ ಅವಳ ಕೋಣೆಯ  ಬಾಗಿಲು ದೂಡಿ ನೋಡಿದ. ಅವಳು ಅಲ್ಲಿ ಕಾಣಿಸಲಿಲ್ಲ.  ಭಯದಿಂದ ಹೊರಗೆ ಓಡಿ  ಸುತ್ತಲೂ ಹುಡುಕಾಡಿದ. ಆದರೆ ಅವಳ ಸುಳಿವು ಸಿಗಲಿಲ್ಲ. ಅಷ್ಟರಲ್ಲಿ ಅದೇ ನಾಗರಹಾವು ಅವನತ್ತ ಹೆಡೆಯೆತ್ತಿ ತಿರುಗಿ ನೋಡಿತು. ವಿಕ್ರಮನಿಗೆ ಅದೊಂದು ಸಂದೇಶದಂತೆ ಭಾಸವಾಯಿತು.  ನನ್ನ ಹಿಂದೆ ಬಾ ಅಂತ ಸನ್ನೆ ಮಾಡಿದಂತೆ ವಿಕ್ರಮನಿಗೆ  ಅನಿಸಿತು. ಹಾವು ನಿಧಾನವಾಗಿ ಮುಂದೆ ಸರಿಯಿತು. ವಿಕ್ರಮನಿಗೆ ಏನೋ ಆಕರ್ಷಣೆಯಾದಂತಾಗಿ, ಆ ಹಾವನ್ನು ಹಿಂಬಾಲಿಸಿದ. 

***

ಆ ಹಾವು ಮನೆಯ ಪಕ್ಕದಲ್ಲಿದ್ದ  ನದಿ ಮಾರ್ಗವಾಗಿ  ಚಲಿಸಿ, ಒಂದು ಬೆಟ್ಟದ ಬುಡದಲ್ಲಿದ್ದ ಗುಹೆಯೊಳಗೆ ಪ್ರವೇಶಿಸಿತು. ಹಾವನ್ನು ಹಿಂಬಾಲಿಸಿದ ವಿಕ್ರಮನೂ ಆ ಗುಹೆ ಪ್ರವೇಶಿಸಿದ. ತಂಪಾಗಿದ್ದ ಆ ಗುಹೆಯೊಳಗೆ ಸ್ವಲ್ಪ ಮುಂದೆ ಸಾಗಿದಾಗ, ಒಂದು ದೊಡ್ಡ ಹಳೆಯ ಪೆಟ್ಟಿಗೆ ಕಂಡಿತು. ಅದು ಸಾಮಾನ್ಯವಾದ  ಪೆಟ್ಟಿಗೆಯಾಗಿರಲಿಲ್ಲ. ರಾಜಮಹಾರಾಜರ ಕಾಲದ ಪೆಟ್ಟಿಗೆಯಂತೆ ಭಾಸವಾಯಿತು. ವಿಕ್ರಮನಿಗೆ ಕುತೂಹಲವಿದ್ದರೂ, ಮನೆಯಲ್ಲಿ ಹೇಳದೆ ಅದನ್ನು ತೆರೆಯಲು ಯತ್ನಿಸಲಿಲ್ಲ. ಮನೆಯಲ್ಲಿ ಮಾತನಾಡಿ ಆಮೇಲೆ ಇದರ ಬಗ್ಗೆ ನೋಡೋಣ ಅಂದುಕೊಂಡು, ಮನೆಗೆ ಹಿಂದಿರುಗಿದ. ಯಾರನ್ನೂ ಗಾಬರಿಗೊಳಿಸುವುದು ಬೇಡ ಅಂದುಕೊಂಡು, ತನ್ನ ಕೊನೆಗೆ ಬಂದು ಮಲಗಿದ. 

ಬೆಳಿಗ್ಗೆ ಎದ್ದ ಕೂಡಲೇ ವಿನುತಾಳ ಕೊನೆ ಕಡೆ ನೋಡಿದ ವಿಕ್ರಮನಿಗೆ, ವಿನುತಾ ಅಲ್ಲಿರುವುದನ್ನು ಕಂಡು ನಿರಾಳವಾಯಿತು. ಆದರೆ, ಅವಳ ಮೈಯಲ್ಲೆಲ್ಲಾ ಹಳದಿ ಬಣ್ಣದ ಗುಳ್ಳೆಗಳಿದ್ದವು. ಮೆಲ್ಲನೆ ವಿನುತಾಳ ಪಕ್ಕ ಹೋಗಿ, "ನಿನ್ನೆ ರಾತ್ರಿ ನಿನಗೇನಾಗಿತ್ತು?" ಅಂತ ಪ್ರಶ್ನಿಸಿದ. "ಗೊತ್ತಿಲ್ಲ. ನಂಗೆ ತುಂಬಾನೇ ಸುಸ್ತಾಗುತ್ತಿದೆ" ಅಂತ ನಿಧಾನವಾಗಿ ಹೇಳಿ ವಿನುತಾ  ನಿದ್ದೆಗೆ ಜಾರಿದಳು.  ವಿಕ್ರಮನ ಅನುಮಾನ  ಗಟ್ಟಿಯಾಗತೊಡಗಿತು. ಮನೆಯಲ್ಲಿ ಈ ವಿಚಾರವಾಗಿ ಮಾತನಾಡಲೇಬೇಕು ಅಂದುಕೊಂಡು, ಸರಿಯಾದ ಸಮಯಕ್ಕಾಗಿ ಲೆಕ್ಕ ಹಾಕಿದ.

ಆ ದಿನ ಸಾಯಂಕಾಲದ ಹೊತ್ತಿಗೆ, ವಿಮಲಾ ಹಾಗೂ ವಿನೋದ ಇಬ್ಬರೂ ಚಹಾ ಕುಡಿಯುತ್ತಿದ್ದರು. ಅದೇ ಸರಿಯಾದ ಸಮಯ ಎಂದು ವಿಕ್ರಮ ನಿಧಾನವಾಗಿ ವಿಷಯವನ್ನು ಪ್ರಸ್ತಾಪಿಸಿ, ತನ್ನ ಅನುಮಾನವನ್ನು ಸ್ಪಷ್ಟೀಕರಿಸಿದ ವಿಕ್ರಮ. ವಿಮಲಾ ಕಣ್ಣೀರಿಡುತ್ತಾ "ವಿಕ್ರಮ, ನಮ್ಮ ಮನೆತನಕ್ಕೆ ಒಂದು ದೊಡ್ಡ ಹಳೆಕಾಲದ ಶಾಪ ಇದೆ. ಹಳೆಯ ಕಾಲದಲ್ಲಿ, ಇಲ್ಲಿ ಒಂದು ಮಹಾಶಿವನ ದೇವಸ್ಥಾನ ಇತ್ತು. ಸುಮಾರು 5000 ವರ್ಷಗಳಷ್ಟು ಹಳೆಯದು. ಅದನ್ನು ಕಾಪಾಡುತ್ತಿದ್ದ ನಾಗದೇವತೆಯನ್ನು ನಮ್ಮ ಪೂರ್ವಜರು ಅವಮಾನಿಸಿದ್ದರು… ಆಗಿನಿಂದ, ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಈ ಶಾಪ. ಬೇಸರದ ವಿಷಯವೆಂದರೆ, ವಿನುತಾಳೇ ಆ ಶಾಪದ ಬಲಿಯಾಗಿದ್ದಳು. ಪ್ರತಿ ಪಂಚಮಿಯ ರಾತ್ರಿ, ಅವಳು ನಾಗರೂಪಕ್ಕೆ ಬದಲಾಗುತ್ತಾಳೆ… ನಾವು ಏನೂ ಮಾಡಲು ಸಾಧ್ಯವಾಗುತ್ತಿಲ್ಲ." ಅಂತ ಗದ್ಗದಿತ ಕಂಠದಲ್ಲಿ ಹೇಳಿಕೊಂಡಳು. "ಇದಕ್ಕೇನೂ ಪರಿಹಾರವಿಲ್ಲವೇ?" ಎಂದು ವಿಕ್ರಮ ಪ್ರಶ್ನಿಸಿದ. "ತುಂಬ ಪ್ರಯತ್ನ ಪಟ್ಟೆವು ವಿಕ್ರಮ. ಆದರೆ ಪರಿಹಾರ ಏನು ಎಂಬುದು ನಮಗೆ ತಿಳಿಯಲಿಲ್ಲ" ಅಂತ ವಿನೋದ ಹೇಳಿದನು.

"ಈ ಶಾಪವನ್ನು ಮುರಿಯಲೇಬೇಕು." ಎಂದು ತೀರ್ಮಾನಿಸಿಕೊಂಡು ವಿಕ್ರಮ ಮೊತ್ತ ಮೊದಲಿಗೆ ಆ ಹಳ್ಳಿಯ ಜನರೆಲ್ಲರನ್ನೂ ಒಟ್ಟು ಸೇರಿಸಿದ. ಗುಹೆಯ ವಿಚಾರ, ಗುಹೆಯಲ್ಲಿದ್ದ ಪೆಟ್ಟಿಗೆಯ ವಿಚಾರ ತಿಳಿಸಿ, ಊರ ಹಿರಿಯ ಸಮಸ್ತರ ಅನುಮತಿಯಂತೆ, ಆ ಪೆಟ್ಟಿಗೆಯನ್ನು ತೆರೆದ. ಅದರೊಳಗೆ ಪವಿತ್ರವಾದ ಶಿವಲಿಂಗ, ನಾಗನ ಕಲ್ಲುಗಳು ಹಾಗೂ ದೇವಸ್ಥಾನದ ಒಡವೆ ಶಾಸನಗಳು ಸಿಕ್ಕವು. ಅದು ಪುರಾತನ ದೇವಾಲಯದ ಮೂಲ ವಸ್ತುಗಳಾಗಿದ್ದವು. 

ಪ್ರಶ್ನೆ ಇಟ್ಟಾಗ, ಮುಂದಿನ ಪಂಚಮಿಯೊಳಗೆ,ದೇವಸ್ಥಾನದ ಪುನರ್ ನಿರ್ಮಾಣ ಆಗಬೇಕು ಎಂದು ಉತ್ತರ ದೊರಕಿತು.  ಹಳ್ಳಿಯ ಜನರೆಲ್ಲರೂ ಒಟ್ಟು ಸೇರಿ, ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡರು. ಪ್ರತಿ ದಿನ ಹೋಮ, ಪೂಜೆ, ನಾಗಪೂಜೆ ಇತ್ಯಾದಿಗಳು ನಡೆದು, ದೇವಸ್ಥಾನ ನಿರ್ಮಾಣವಾಗಿ, ಅದ್ಧೂರಿಯಾಗಿ ಎಲ್ಲ ಕಾರ್ಯಗಳು ಪಂಚಮಿ ಆಗುತ್ತಲೇ ನಡೆಯಿತು. 

***

ಅಂದು ಮತ್ತೆ ಪಂಚಮಿ. ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಮಂಗಳವಾದ ವಾತಾವರಣ. ಬೆಳ್ಳಗಿನ ಬೆಳಕಿನಲ್ಲಿ ಶಿವಲಿಂಗ ಹೊಳೆಯುತ್ತಿತ್ತು. ಹೋಮದ ಧೂಪದ ವಾಸನೆ ಗಾಳಿಯಲ್ಲಿ ಹರಡಿಕೊಂಡಿತ್ತು. ಹಳ್ಳಿಯ ಪ್ರತಿಯೊಬ್ಬರ ಕಣ್ಣುಗಳಲ್ಲಿ ಒಂದೇ ಆಶೆ— “ಇಂದು ಈ ಶಾಪ ಕೊನೆಯಾಗಬೇಕು."
ಬೆಳಗ್ಗಿನ ಸಮಯದಲ್ಲಿ, ದೇವರ ಪೂಜಾಕಾರ್ಯಗಳು ನೆರವೇರಿತು. ವಿಕ್ರಮ ಹಾಗೂ ವಿನುತಾ ಇಬ್ಬರೂ ಒಟ್ಟಿಗೆ ದೇವರಲ್ಲಿ ಪ್ರಾರ್ಥಿಸಿದರು. ವಿನುತಾಳ ಕಣ್ಣುಗಳಲ್ಲಿ ಭಯವೂ ಇತ್ತು… ಆದರೆ ವಿಕ್ರಮನ ಕೈ ಹಿಡಿದಿದ್ದ ವಿಶ್ವಾಸವೂ ಇತ್ತು. “ನಿನ್ನ ಜೊತೆಗೆ ನಾನು ಇದ್ದೇನೆ…” ಎಂದು ಅವನು ನಿಧಾನವಾಗಿ ಹೇಳಿದ.

ಆ ರಾತ್ರಿ, ವಿನುತಾ ಹಾಗೂ ಮನೆಯವರೆಲ್ಲ ದೇವಸ್ಥಾನದಲ್ಲೇ ಇದ್ದರು. ಹನ್ನೆರಡು ಗಂಟೆ ಆಗುತ್ತಿದ್ದಂತೆ, ಗಾಳಿಯ ಸದ್ದು ಬದಲಾಯಿತು. ದೀಪಗಳ ಜ್ವಾಲೆ ತೂಗತೊಡಗಿತು. ವಿನುತಾಳ ದೇಹ ನಿಧಾನವಾಗಿ ಕಂಪಿಸತೊಡಗಿತು…ಅವಳ ಕಣ್ಣುಗಳು ಬದಲಾಗತೊಡಗಿದವು…ವಿನುತಾ ಮತ್ತೆ ನಾಗರೂಪಕ್ಕೆ ಬದಲಾಗುತ್ತಿದ್ದಾಗ, ದೇವಸ್ಥಾನದ ಗಂಟೆ ತಾನಾಗಿಯೇ "ಢಣ್ ಢಣ್ " ಎಂದು ಮೊಳಗಿತು. ತೂಗುತ್ತಿದ್ದ ದೀಪಗಳ ಆ ಕಿರಣದಲ್ಲಿ—ಒಂದು ಮಹಾ ನಾಗದೇವತೆ ಪ್ರತ್ಯಕ್ಷವಾಯಿತು! ಅದು ಭಯಾನಕವಾಗಿರಲಿಲ್ಲ…ಅದು ದಿವ್ಯವಾಗಿತ್ತು… ಕರುಣೆಯಿಂದ ಕೂಡಿತ್ತು…

ನಾಗದೇವತೆ ಗಂಭೀರ ಧ್ವನಿಯಲ್ಲಿ ಹೇಳಿತು: "ನಿಮ್ಮ ಭಕ್ತಿ, ಶ್ರಮ ಹಾಗೂ ಸ್ಥಿರವಾದ ಬದ್ಧತೆಗೆ ನಾನು ಮೆಚ್ಚಿದೆ. “ಮಾನವನ ಅಹಂಕಾರದಿಂದ ಹುಟ್ಟಿದ ಶಾಪ…
ಇಂದು ಮಾನವನ ಭಕ್ತಿ ಮತ್ತು ಪ್ರೀತಿಯಿಂದ ಮುಕ್ತವಾಗುತ್ತಿದೆ…ವಿಕ್ರಮ…ನಿನ್ನ ಧೈರ್ಯ, ನಿನ್ನ ನಿಷ್ಠೆ…ಮತ್ತು ಈ ಹಳ್ಳಿಯ ಜನರ ಒಗ್ಗಟ್ಟಿನ ಶ್ರಮ— ಇವೆಲ್ಲವು ಈ 5000 ವರ್ಷದ ಶಾಪವನ್ನು ಕೊನೆಗೊಳಿಸಿದೆ…ಇಂದಿಗೆ ನಿಮ್ಮ ಮನೆತನಕ್ಕೆ ಅಂತಿದ್ದ ಶಾಪ ಮುಕ್ತಿಯಾಯಿತು. ನಿಮ್ಮ ಬದುಕು ಬಂಗಾರವಾಗಲಿ" ಎಂದು ಹೇಳಿತು. ವಿನುತಾಳ ನಾಗರೂಪ ನಿಧಾನವಾಗಿ ಕರಗತೊಡಗಿತು. ವಿನುತಾ ತನ್ನ ಸ್ವರೂಪಕ್ಕೆ ಮರಳಿದಳು. ಅವಳು ಅಚಾನಕ್ ನೆಲಕ್ಕೆ ಕುಸಿದು ಬಿದ್ದಳು. “ವಿನುತಾ…!” ಎಂದು ಕರೆದ ವಿಕ್ರಮ ಅವಳತ್ತ ಓಡಿದ. ಮಹಾಶಿವನ ಲಿಂಗಪ್ರಸಾದವನ್ನು ಅರ್ಚಕರು ವಿನುತಾಳ ಹಣೆಗೆ ಹಚ್ಚಿದರು. 

ಕೆಲ ಕ್ಷಣಗಳ ಮೌನ…ವಿನುತಾಳ ಕಣ್ಣಲ್ಲಿ ಮತ್ತೆ ಜೀವ ಬಂದಂತಾಗಿತ್ತು. ಅವಳ ಕಣ್ಣುಗಳು ನಿಧಾನವಾಗಿ ತೆರೆದವು…ಅವಳ ಮುಖದಲ್ಲಿ ಮತ್ತೆ ಆ ಹಳೆಯ ಮಂದಹಾಸ ಅರಳಿತು…ವಿಕ್ರಮನನ್ನು ಅಪ್ಪಿಕೊಂಡು, ಧನ್ಯವಾದ ಸೂಚಿಸಿದಳು. ಗಟ್ಟಿಯಾಗಿ ವಿಕ್ರಮನ ಕೈ ಹಿಡಿದುಕೊಂಡು ಮಂದಹಾಸ ಬೀರುತ್ತಿದ್ದಳು. ಈ ಎರಡು ಜನರ ಜೋಡಿ ಸುಂದರವಾಗಿ ಕಾಣುತ್ತಿತ್ತು. ಹಳ್ಳಿಯ ಜನರೆಲ್ಲ “ಹರ ಹರ ಮಹಾದೇವ!” ಎಂದು ಕೂಗಿ ಸಂತೋಷಪಟ್ಟರು. ಆ ಪುರಾತನ ದೇವಾಲಯ ಮತ್ತೆ ಜೀವಂತವಾಯಿತು. 

ದೇವಾಲಯದ ಗಂಟೆಗಳು ನಿರಂತರವಾಗಿ ಮೊಳಗುತ್ತಾ…ಆಕಾಶದಲ್ಲೇನೋ ಒಂದು ಶಾಂತಿ ಹರಡಿದಂತೆ ಅನಿಸಿತು. ಪ್ರತಿ ವರ್ಷ ಪಂಚಮಿಯಂದು ಮಹೋತ್ಸವ ನಡೆಯತೊಡಗಿತು. 

ವಿಕ್ರಮ ಮತ್ತು ವಿನುತಾ— ಕೇವಲ ಪ್ರೇಮಿಗಳಲ್ಲ…ಒಂದು ಶಾಪವನ್ನು ಮುರಿದ ಜೋಡಿ. ಅವರ ಪ್ರೀತಿ—ಒಂದು ಮನೆತನವನ್ನು ಉಳಿಸಿತು…ಒಂದು ಹಳ್ಳಿಯನ್ನು ಪುನರ್ಜೀವಗೊಳಿಸಿತು… ಕೆಲವು ಶಾಪಗಳು ಭಯದಿಂದ ಅಲ್ಲ, ಭಕ್ತಿಯಿಂದ ಮುರಿಯುತ್ತದೆ. ಕೆಲವು ಪ್ರೇಮಗಳು ಭಾವನೆಗಳನ್ನಲ್ಲ, ಜೀವನವನ್ನು ರೂಪಿಸುತ್ತವೆ. ನಿಜವಾದ ಪ್ರೀತಿ ಇದ್ದಲ್ಲಿ… ದೈವವೂ ತಲೆಬಾಗುತ್ತದೆ…

*** 

  ✍🏻 Deepalaxmi Bhat
Mangaluru  

ಶುಕ್ರವಾರ, ಜನವರಿ 23, 2026

ಮರೆತುಹೋದ ಬೇರುಗಳು

 

✍🏻ದೀಪಲಕ್ಷ್ಮಿ ಭಟ್, ಮಂಗಳೂರು 

ಶ್ರೀ ರಾಮ ಶರ್ಮ ಎಂಬ ಹೆಸರು ಊರಿನ ಹಳೆಯ ಕಾಲದ ನೆನಪುಗಳಲ್ಲೊಂದಾಗಿತ್ತು. ಈಗಿನ ಪೀಳಿಗೆಗೆ ಅದು ಕೇವಲ ಒಂದು ಸಾಮಾನ್ಯ ಹೆಸರು ಮಾತ್ರ. ಆದರೆ ಆ ಹೆಸರಿನ ಹಿಂದೆ ಅಡಗಿದ್ದ ಕಥೆ, ಒಂದು ಊರಿನ ಬೆಳವಣಿಗೆಯ ಮೌನ ಸಾಕ್ಷಿಯಾಗಿತ್ತು.

ಶ್ರೀ ರಾಮ ಶರ್ಮಾ ಅವರ ಬದುಕು ಬಡತನದ ಮಣ್ಣಿನಲ್ಲಿ ಬೇರು ಬಿಟ್ಟಿತ್ತು. ದೊಡ್ಡ ಕೂಡು ಕುಟುಂಬ, ಹಸಿದ ಹೊಟ್ಟೆಗಳು, ಹೊಟ್ಟೆ ತುಂಬಿಸಿಕೊಳ್ಳಲು ಮಾಡುವ ಹೋರಾಟ, ಹಂಚಿಕೊಂಡ ಕನಸುಗಳು — ಇವೆಲ್ಲದರ ಮಧ್ಯೆ ವಿದ್ಯೆಯ ಕೈ ಬಿಡದೇ ಹಿಡಿದುಕೊಂಡು ಹೋಗಿದ್ದರು ಅವರು. ಅಣ್ಣಂದಿರ ಚಿಕ್ಕ ಕ್ಯಾಂಟೀನ್‌ನಲ್ಲಿ ಚಿಕ್ಕಪುಟ್ಟ ಕೆಲಸ, ಹಗಲು ಮರದ ಮಿಲ್ಲಿನಲ್ಲಿ ಅಟೆಂಡರ್ ಕೆಲಸ, ಸಂಜೆ ಕಾಲೇಜು — ಹೀಗೆ ಅವನ ದಿನಗಳು ಓಡುತ್ತಿದ್ದವು. ದುಡ್ಡಿಗಿಂತ ಜವಾಬ್ದಾರಿ ದೊಡ್ಡದಾಗಿದ್ದ ಕಾಲ ಅದು. ಕಾಲೇಜಿನ ಪುಸ್ತಕಗಳನ್ನು ಚೀಲದಲ್ಲಿ ಹಾಕಿಕೊಂಡು, ಕೈಯಲ್ಲಿ ತಟ್ಟೆ ತೊಳೆಯುವ ಚಿಂದಿ ಹಿಡಿದು, ಅವರು ಜೀವನದ ಪಾಠವನ್ನು ಕಲಿಯುತ್ತಿದ್ದರು. ಮಿಲ್ಲಿನಲ್ಲಿ ಆ ಮರದ ಸದ್ದು, ಧೂಳು, ಬೆವರು — ಇವೆಲ್ಲದರ  ನಡುವೆ ಬದುಕು ಸಾಗುತ್ತಿತ್ತು. ಕಣ್ಣು ತುಂಬಾ ನಿದ್ದೆ, ಮನಸ್ಸು ತುಂಬಾ ಕನಸು. “ಒಂದು ದಿನ ಒಳ್ಳೆಯ ಕೆಲಸ ಸಿಗಬೇಕು” ಅನ್ನೋ ಕನಸು ಮಾತ್ರ ಅವರಿಗೆ ದಾರಿ ತೋರಿಸುತ್ತಿತ್ತು. ಆ ಕನಸು ದೇವರ ಕೃಪೆಯಿಂದ ಸಾಕಾರವಾಯಿತು. ಸರಕಾರಿ ಕೆಲಸ. ದೊಡ್ಡ ಹುದ್ದೆ ಅಲ್ಲ. ಆದರೆ ಸ್ಥಿರ ಸಂಬಳ, ಗೌರವ. ಮೊದಲ ತಿಂಗಳ ಸಂಬಳ ಬಂದ ದಿನ, ಮನೆಗೆ ಹೊಸ ತಟ್ಟೆ, ಮನೆಗೆ ಉಪಯೋಗವಾಗುವ ವಸ್ತುಗಳು, ತೋಟಕ್ಕೆ ಗಿಡಗಳು, ಅಮ್ಮನ ಕೈಗೆ ಒಂದು ಸೀರೆ —ಅದೇ ಅವರ ಸಂತೋಷ.

*** 

ಅದೇ ಸಮಯದಲ್ಲಿ ಬಂದ ಒಳ್ಳೆಯ ಸಂಬಂಧ, ಪಲ್ಲವಿ. ಸೌಮ್ಯ ಸ್ವಭಾವದ, ಹೊಂದಾಣಿಕೆಯ ಹೆಣ್ಣು. ಸರಕಾರಿ ಕೆಲಸ, ಸುಂದರವಾದ ಮುಖ, ಗಟ್ಟಿಮುಟ್ಟಾದ ಮೈಕಟ್ಟು, ಜವಾಬ್ದಾರಿಯುತ ನಡೆ ನುಡಿ, ಈ ಎಲ್ಲ ಗುಣಗಳಿಂದಾಗಿ ಎಲ್ಲರಿಗೂ ಶರ್ಮ ಅವರು ಇಷ್ಟವಾದರು. ಸಂಬಂಧ ಒಪ್ಪಿಗೆಯಾಗಿ, ಮದುವೆಯಾದ ಮೇಲೆ ಅವರ  ಜೀವನ ನಿಧಾನವಾಗಿ ನೆಮ್ಮದಿಯ ಹಾದಿ ಹಿಡಿಯಿತು. ಪುಟ್ಟ ಮಗಳು ಹುಟ್ಟಿದಾಗ, ಶರ್ಮರ ಕಣ್ಣುಗಳಲ್ಲಿ ಮಿಂಚಿದ ಸಂತೋಷವನ್ನು ಯಾರೂ ಮರೆತಿರಲಿಲ್ಲ. ಮಗಳು ರಮ್ಯಾ ಪಲ್ಲವಿಯ ಪ್ರತಿಬಿಂಬದಂತೆ ಕಾಣುತ್ತಿದ್ದಳು. ಆ ವರ್ಷವೇ, ಕೂಡು ಕುಟುಂಬವಾಗಿದ್ದ ಅವರ ಕುಟುಂಬ ಬೇರೆಬೇರೆಯಾಯಿತು. ದೊಡ್ಡ ಅಣ್ಣ ಮನೆತನದ ಮನೆಯಲ್ಲಿದ್ದರೆ, ಚಿಕ್ಕ ಅಣ್ಣ ಇನ್ನೊಂದು ಮನೆ ಕಟ್ಟಿಸಿ, ಸ್ವಂತ ದಿನಸಿ ಅಂಗಡಿ ಒಂದನ್ನು ಇಟ್ಟು, ಸ್ವಂತ ಕುಟುಂಬ ರೂಪಿಸಿಕೊಂಡರು. ಹಾಗಿರುವಾಗ, ಒಲ್ಲದ ಮನಸ್ಸಿನಲ್ಲಿಯೇ, ಶರ್ಮರೂ ಕೂಡಾ ತಮ್ಮ ಸ್ವಂತ ದುಡ್ಡಿನಲ್ಲಿ ಮನೆಯೊಂದನ್ನು ಕಟ್ಟಿಸಿ, ಬೇರೆ ಕುಳಿತರು. ಕೂಡು ಕುಟುಂಬದಲ್ಲಿದ್ದ ಅವರು ಈಗ ಮೂರು ಜನರ ಪುಟ್ಟ ಕುಟುಂಬವಾಗಿ ಬದಲಾದರು. ಆದರೂ ತಮ್ಮ ಪುಟ್ಟದಾದ ಸಂಸಾರದಲ್ಲಿ ಸಂತೋಷದಿಂದ ಕಾಲ ಕಳೆಯುತ್ತಿದ್ದರು. 

ಆದರೆ ಅವರ ಸಂತೋಷ ದೇವರಿಗೆ ಹೆಚ್ಚು ದಿನ ಇಷ್ಟವಾಗಲಿಲ್ಲವೇನೋ. ಮುಂದಿನ ವರ್ಷವೇ, ಎರಡನೇ ಹೆರಿಗೆಯ ಸಮಯದಲ್ಲಿ ಪಲ್ಲವಿ ಕಾಮಾಲೆ ರೋಗಕ್ಕೆ  ತುತ್ತಾಗಿ ಜೀವ ಕಳೆದುಕೊಂಡಳು. ಶರ್ಮರಿಗೆ ಲೋಕವೇ ಕತ್ತಲಾಗಿತ್ತು. ಎರಡು ವರ್ಷದ ಆ ಪುಟ್ಟ ಮಗು ರಮ್ಯಾಳನ್ನು  ಕೈಯಲ್ಲಿ ಹಿಡಿದುಕೊಂಡಾಗ, “ನಾನು ಇದಕ್ಕೆ ಅಪ್ಪ ಅಮ್ಮ - ಎರಡೂ  ಆಗಬೇಕಾ?” ಅನ್ನೋ ಪ್ರಶ್ನೆ ಅವರನ್ನು ಕಾಡುತ್ತಿತ್ತು. ಎರಡು ವರ್ಷದ ಮಗಳು ರಮ್ಯಾಳನ್ನು ಎದೆಗೆ ಒತ್ತಿಕೊಂಡು ಶರ್ಮಾರು  ಅತ್ತದ್ದು ಯಾರಿಗೂ ಕಾಣಲಿಲ್ಲ—ಅವರ ಕಣ್ಣೀರು ಒಳಗೇ ಹರಿಯಿತು.

*** 

ಆ ಸಮಯದಲ್ಲೇ ಒಂದು ವಿಚಿತ್ರ ಘಟನೆ ನಡೆಯಿತು. ರಮ್ಯಾ ತನ್ನ ಚಿಕ್ಕಮ್ಮ ಜಾನಕಿಯನ್ನು “ಅಮ್ಮ” ಎಂದು ಕರೆಯಲು ಶುರುಮಾಡಿದಳು. ಅದು ಒಮ್ಮೆ ಅಲ್ಲ, ಪ್ರತಿದಿನ. ಆ ಪದ ಜಾನಕಿಯ ಹೃದಯವನ್ನೇ ಬದಲಾಯಿಸಿತು. ಹಿರಿಯರ ಮಾತಿನಂತೆ, ಸಮಾಜದ ನಿರೀಕ್ಷೆಯಂತೆ, ಜಾನಕಿ ಶರ್ಮರ ಜೀವನಕ್ಕೆ ಕಾಲಿಟ್ಟಳು — ತನ್ನ ಬದುಕಿಗಿಂತ ಆ ಪುಟ್ಟ ಮಗುವಿನ ಬದುಕು ಮುಖ್ಯ ಎಂದುಕೊಂಡು. . ಆ ಮದುವೆ ಒಬ್ಬ ಹೆಣ್ಣಿನ ತ್ಯಾಗ ಮಾತ್ರವಲ್ಲ — ಒಬ್ಬ ಮಗುವಿನ ಬದುಕಿಗೆ ಹೊಸ ಉಸಿರು. ಜಾನಕಿ ಕಾಲಿಟ್ಟ ನಂತರ ಶರ್ಮಾರ ಮನೆಗೆ ಬೆಳಕು ಬಂತು.

ಜಾನಕಿ ಬಂದ ಮೇಲೆ ಶರ್ಮರ ಬದುಕು ಸುಗಮವಾಗಿ ಸಾಗಿತು. ಇಬ್ಬರಿಗೂ ಸರಕಾರಿ ಕೆಲಸ. ಶ್ರಮ, ಶಿಸ್ತು, ಪ್ರಾಮಾಣಿಕತೆ—ಇವುಗಳೇ ಅವರ ಮನೆತನದ ಅಡಿಪಾಯ. ಜಾನಕಿ ರಮ್ಯಾಳನ್ನು “ಮಲತಾಯಿ” ಎಂದಲ್ಲ, ತನ್ನ ಉಸಿರಿನ ಭಾಗವೆಂದು ನೋಡಿದಳು. ಆ ಪ್ರೀತಿ ನಂತರ ಹುಟ್ಟಿದ ಕೃಷ್ಣ, ಸೌಮ್ಯರಿಗೂ ಹಂಚಿತು. ಮೂರು ಮಕ್ಕಳು—ಒಂದೇ ತಾಯಿಯ ಮಕ್ಕಳೆಂಬಂತೆ ಬೆಳೆದರು.

ಊರಿನ ಜನರು ಹೇಳುತ್ತಿದ್ದರು: “ಇವರ ಮಕ್ಕಳನ್ನ ನೋಡಿ ಕಲಿಯಬೇಕು. ರಕ್ತ ಬೇರೆ ಆದ್ರೂ ಮನಸ್ಸು ಒಂದೇ.”

*** 

ಶರ್ಮಾ ಅವರು ತುಂಬಾ ದೂರದೃಷ್ಟಿತ್ವ ಹೊಂದಿದ ವ್ಯಕ್ತಿಯಾದ ಕಾರಣ ಅವರ ದೃಷ್ಟಿ ಅಷ್ಟಕ್ಕೆ ನಿಂತಿರಲಿಲ್ಲ. “ನಮ್ಮ ಊರಿನ ಮಕ್ಕಳು ದೂರದ ಆಂಗ್ಲ ಮಾಧ್ಯಮ ಶಾಲೆಗೆ ಹೋಗಬೇಕಾ?” ಅನ್ನೋ ಪ್ರಶ್ನೆ ಅವರನ್ನು ಕಾಡಿತು. ನಮ್ಮ ಊರಿನಲ್ಲಿಯೇ ಒಂದು ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಬೇಕು ಎಂದುಕೊಂಡು, ತಮ್ಮ ಮನೆಯ ಒಂದು ಭಾಗದಲ್ಲೇ, ಎರಡು ಶಿಕ್ಷಕಿಯರ ಜೊತೆ ಸೇರಿ, ಶಾಲೆ ಆರಂಭಿಸಿದರು. ಮೊದಲ ವರ್ಷ ಕೇವಲ ಹತ್ತು ಮಕ್ಕಳು. ಎರಡನೇ ವರ್ಷ ಐವತ್ತು. ನಂತರ ನೂರು. ಹೀಗೆ ಶಾಲೆ ಬೆಳೆಯುತ್ತಿತ್ತು. ಶಾಲೆಯ ಹೆಸರೂ ಬೆಳೆಯಿತು. ಕ್ರಮೇಣ ಮಕ್ಕಳು ಜಾಸ್ತಿ ಆದಂತೆ, ಮನೆಯ ಆ ಪುಟ್ಟ ಜಾಗ ಸಾಲಲಿಲ್ಲ. ಪಿತ್ರಾರ್ಜಿತ ಆಸ್ತಿ ಹಂಚಿಕೆಯ ಸಮಯದಲ್ಲಿ, ದಾರಿ ಇಲ್ಲದ ಜಾಗ ಒಂದನ್ನು ಶರ್ಮರಿಗೆ ಕೊಟ್ಟಿದ್ದರು. ಆಗ ಅವರು ವಿರೋಧಿಸಿರಲಿಲ್ಲ. “ನನಗೆ ಕೆಲಸಕ್ಕೆ ಬರುತ್ತದೆ” ಎಂದು ಪಿತ್ರಾರ್ಜಿತವಾಗಿ ದೊರೆತ ದಾರಿ ಇಲ್ಲದ ಜಾಗವನ್ನು ಸಂಪೂರ್ಣ ಮನಸ್ಸಿನಿಂದ ತೆಗೆದುಕೊಂಡಿದ್ದರು. ಮಗಳು ರಮ್ಯಾಳಿಗೆ ಹದಿನೆಂಟು ತುಂಬಿದ ದಿನ ಆ ಜಾಗದ ಅರ್ಧದಷ್ಟನ್ನು ಶಾಲೆಗೆಂದು ದಾನ ಮಾಡಿದರು. ಆಗ ಶಾಲೆಯ ಕಾರಣದಿಂದ ಆ ಜಾಗಕ್ಕೆ ದಾರಿ ಬಂತು. ಶಾಲೆಗೂ ಊರಿಗೂ ದಾರಿ ತೆರೆದಿತು.

ವರ್ಷಗಳು ಉರುಳಿದವು.

ಶಾಲೆ ದೊಡ್ಡದಾಯಿತು. ಹೊಸ ಬೋರ್ಡ್, ಹೊಸ ಟ್ರಸ್ಟ್, ಹೊಸ ಮ್ಯಾನೇಜ್ಮೆಂಟ್. ಶರ್ಮರ ಹೆಸರು ನಿಧಾನವಾಗಿ ದಾಖಲೆಗಳ ಅಂಚಿಗೆ ಸರಿಯಿತು. ಹೊಸ ಮಕ್ಕಳು, ಹೊಸ ಶಿಕ್ಷಕರು—ಯಾರಿಗೂ “ಈ ಶಾಲೆ ಯಾರು ಶುರು ಮಾಡಿದ್ರು?” ಅನ್ನೋ ಪ್ರಶ್ನೆಯೇ ಇರಲಿಲ್ಲ. ಅದು ಅವರಿಗೆ ಗೊತ್ತಿರಬೇಕಾದದ್ದು ಅನ್ನೋ ವಿಷಯಾನೂ ಅವರಿಗೆ ಬೇಡವಾಗಿತ್ತು.  ಶಾಲೆಯಲ್ಲಿ ಕಲಿಯುತ್ತಿರುವವರಿಗೆ, ಕಲಿಸುತ್ತಿರುವವರಿಗೆ, ಮ್ಯಾನೇಜ್ಮೆಂಟ್ ಗೆ ಎಲ್ಲರಿಗೂ ಆ ವಿಷಯ ಅಗತ್ಯವಾದದ್ದು ಎಂದು ಎನಿಸಲಿಲ್ಲವೋ ಏನೋ. 

ಇಂದು ಶರ್ಮರು ವೃದ್ಧರಾಗಿದ್ದರು. ಜಾನಕಿ ಜೊತೆ ವಾಕಿಂಗ್ ಎಂದು ಹೊರಟು, ಶಾಲೆಯ ದಾರಿಯಲ್ಲಿ ನಿಂತು ಶಾಲೆ ಹೇಗೆ ನಡೆಯುತ್ತಿದೆ ಅಂಬುದನ್ನು ನೋಡುತ್ತಿದ್ದರು. ಸಂಜೆ ಸಮಯವಾದ ಕಾರಣ, ಶಾಲೆಯ ಮಕ್ಕಳೆಲ್ಲ ಆಟ ಆಡುತ್ತಿದ್ದರು. ಆಡುತ್ತಿದ್ದ ಮಕ್ಕಳು ಅವರನ್ನು “ಯಾರಪ್ಪಾ?” ಅನ್ನುವ ದೃಷ್ಟಿಯಿಂದ ನೋಡುತ್ತಾರೆ. ಯಾರಿಗೂ ಗೊತ್ತಿಲ್ಲ—ಅವರು ಕೊಟ್ಟಂಥ ಜಾಗವೇ ಒಮ್ಮೆ ಆ ಮಕ್ಕಳ ಶಾಲೆಯ ಮೊದಲ ತರಗತಿ ಆಗಿತ್ತು ಅನ್ನೋದು.

ಹಾಗೆ ದಿನ ಕಳೆದು ಒಂದು ದಿನ ಶಾಲೆಯ ವಾರ್ಷಿಕೋತ್ಸವ ದಿನ. ಮುಖ್ಯ ಅತಿಥಿಗಳು, ಭಾಷಣಗಳು. ಶರ್ಮರು ಜಾನಕಿ ಜೊತೆ ಬಂದು  ಹಿಂಬದಿ ಸಾಲಿನಲ್ಲಿ ಮೌನವಾಗಿ ಕುಳಿತಿದ್ದರು. ಯಾರೂ ಕರೆಯಲಿಲ್ಲ. ಯಾರೂ ಗುರುತಿಸಲಿಲ್ಲ.

ಆದರೆ ಶರ್ಮರು ಬೇಸರಪಡಲಿಲ್ಲ. "ಒಳ್ಳೆಯದು ಮಾಡಿದವರು ಹೆಸರು ಕಳೆದುಕೊಂಡರೆ, ಅದೇ ಅವರ ಸೋಲಾ? ಅಥವಾ, ಹೆಸರು ಇಲ್ಲದೇ ಉಳಿದ ಒಳ್ಳೆಯದೇ ಅವರ ನಿಜವಾದ ಗೆಲುವಾ?"ಆದರೆ ಜಾನಕಿಗೆ ಮಾತ್ರ ಬೇಸರವಾಗಿತ್ತು, ಆದರೂ ಅಷ್ಟೊಂದು ಮಕ್ಕಳನ್ನು ನೋಡುತ್ತಾ ಸಂತೋಷ ಪಡುತ್ತಿದ್ದರು.
ಶರ್ಮರು ಜಾನಕಿಯ ಕೈ ಹಿಡಿದು ನಿಧಾನವಾಗಿ ಹೇಳಿದರು: “ನಾವು ಬೀಜ ಬಿತ್ತಿದ್ದೇವೆ. ಮರ ಬೆಳೆದಿದೆ. ಹಣ್ಣು ಯಾರಿಗೆ ಸಿಗುತ್ತೋ ಅದು ಆ ಭಗವಂತನ ಇಚ್ಛೆ.” ಆ ಮಾತು ಜಾನಕಿಯ ಕಣ್ಣಲ್ಲಿ ನೀರಾಗಿ ಹೊರಬಂತು.


 

***

ಆ ವಾರ್ಷಿಕೋತ್ಸವದ ದಿನ ಮುಗಿದ ಮೇಲೆ, ಶಾಲೆಯ ಆವರಣ ನಿಧಾನವಾಗಿ ಖಾಲಿಯಾಗುತ್ತಿತ್ತು. ಬಣ್ಣದ ಬ್ಯಾನರ್‌ಗಳು ಇನ್ನೂ ತೂಗಾಡುತ್ತಿದ್ದವು. ವೇದಿಕೆಯ ಮೇಲೆ ಹಾಕಿದ್ದ ಹೂವುಗಳು ಒಣಗತೊಡಗಿದ್ದವು. ಮೈಕ್‌ಗಳ ಶಬ್ದ ಮೌನವಾಯಿತು. ಶ್ರೀ ರಾಮ ಶರ್ಮರು ಮತ್ತು ಜಾನಕಿ ನಿಧಾನವಾಗಿ ಎದ್ದು ಹೊರಟರು.

ಅಷ್ಟರಲ್ಲಿ, ಶಾಲೆಯ ಹೊಸ ಪ್ರಾಂಶುಪಾಲರು ಒಬ್ಬ ಶಿಕ್ಷಕರಿಗೆ ಕೇಳಿದರು: “ಆ ಹಳೆಯ ದಂಪತಿ ಯಾರು? ದಿನವಿಡೀ ಹಿಂಬದಿ ಕುಳಿತು ನೋಡ್ತಿದ್ರಲ್ಲ?”

ಶಿಕ್ಷಕಿ ಕ್ಷಣ ಯೋಚಿಸಿ ಹೇಳಿದಳು: “ಗೊತ್ತಿಲ್ಲ ಮೇಡಂ… ಬಹುಶಃ ಹತ್ತಿರದ ಮನೆಗಳ ಯಾರೋ ಹಿರಿಯರು ಇರಬೇಕು.”

ಆ ಮಾತು ಕೇಳಿದ ಕ್ಷಣಕ್ಕೆ, ಜಾನಕಿಯ ಕೈ ಕಂಪಿಸಿತು. ಮನಸ್ಸು ಒಡೆಯಿತು. ಶರ್ಮರು ಒಂದು ಕ್ಷಣ ನಿಂತು ಹಿಂತಿರುಗಿ ನೋಡಿದರು. ವೇದಿಕೆ, ಶಾಲೆಯ ಕಟ್ಟಡ, ಮಕ್ಕಳ ನಗು— ಎಲ್ಲವೂ ಅವರದೇ ದೊರದೃಷ್ಟಿತ್ವದಿಂದ ಹುಟ್ಟಿದ ಕನಸಾಗಿತ್ತು. ಆದರೆ ಇಂದು ಆ ಕನಸುಗಾರನೇ ಅನಾಥನಾಗಿದ್ದ. 

ಅವರು ಏನೂ ಹೇಳಲಿಲ್ಲ. ಹಾಗೆ ತಮ್ಮ ಮನೆಗೆ ಹಿಂದಿರುಗಿದರು. 

*** 

ಮರುದಿನ ಬೆಳಿಗ್ಗೆ, ಶಾಲೆಯ ಆವರಣದಲ್ಲಿ ಗದ್ದಲ. ಪೇಪರ್‌ವಾಲಾ ಬಂದು, “ಇವತ್ತು ನಮ್ಮ ಶಾಲೆಯ ಬಗ್ಗೆ ನ್ಯೂಸ್ ಇದೆ” ಅಂದ. ಎಲ್ಲರೂ ಬೇಗನೆ ನ್ಯೂಸ್ ಪೇಪರ್ ಬಿಡಿಸಿ ನೋಡಿದರು. ಶಾಲೆಯ ಬಗ್ಗೆ ಮುಖ್ಯ ಸುದ್ದಿಯ ಶೀರ್ಷಿಕೆ ಹೀಗೆ ಇತ್ತು:

“ಶಾಲೆ ಸ್ಥಾಪಕನ ಹೆಸರೇ ಮರೆತುಹೋದ ಊರು – ಸಾಮಾಜಿಕ ನಿರ್ಲಕ್ಷ್ಯದ ಮತ್ತೊಂದು ಮುಖ”

ಒಬ್ಬ ಯುವ ಪತ್ರಕರ್ತ, ಊರಿನ ಹಳೆಯ ದಾಖಲೆಗಳನ್ನು ಹುಡುಕಿ, ಶರ್ಮರ ಕಥೆಯನ್ನು ಬರೆದಿದ್ದ. ಶಾಲೆ ಶುರು ಮಾಡಿದ ದಿನದಿಂದ, ಆಸ್ತಿ ದಾನ ಮಾಡಿದ ದಾಖಲೆಗಳವರೆಗೆ—ಎಲ್ಲವೂ ಅಕ್ಷರಗಳಲ್ಲಿ ನಿಂತಿದ್ದವು.

ಶಾಲೆಯ ಮಕ್ಕಳು ಮೊದಲ ಬಾರಿಗೆ ಕೇಳಿದರು: “ನಮ್ಮ ಶಾಲೆಯನ್ನು ಯಾರು ಶುರು ಮಾಡಿದ್ರು?”

ಶಿಕ್ಷಕರಿಗೆ ಉತ್ತರ ಇರಲಿಲ್ಲ.

ಆ ದಿನ ತಮ್ಮ ತಪ್ಪುಗಳ ಅರಿವಾಗಿ, ಶಾಲೆಯಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಿದರು. ಶರ್ಮರನ್ನು ವೇದಿಕೆಗೆ ಕರೆದು ಗೌರವಿಸಲಾಯಿತು. ಶಾಲೆಯ ಬ್ಯಾನರ್ ಮೇಲೆ ಹೊಸ ಸಾಲು ಸೇರಿತು:

“ಸ್ಥಾಪಕರು – ಶ್ರೀ ರಾಮ ಶರ್ಮ”

ಹಸ್ತಾಲಾಪದ ಸಡ್ಡು ಕೇಳಿದಾಗ ಶ್ರೀ ರಾಮ ಶರ್ಮರು ಸುಮ್ಮನೆ ನಕ್ಕರು. ಆದರೆ ಆ ನಗುವಿನಲ್ಲಿ ಗೆಲುವಿನ ಹೆಮ್ಮೆ ಇರಲಿಲ್ಲ. ಕೇವಲ ಒಂದು ಮೃದುವಾದ ನೋವು ಮಾತ್ರ.

ಅವರು ಮೈಕ್ ಹಿಡಿದು ಒಂದೇ ವಾಕ್ಯ ಹೇಳಿದರು: “ಗೌರವ ಬೇಕು ಅಂತ ನಾನು ಶಾಲೆ ಶುರು ಮಾಡಿಲ್ಲ. ಊರಿನ ಸಮಸ್ತ ಜನರ ಉಪಕಾರಕ್ಕೆಂದು ಈ ಶಾಲೆ ನಿರ್ಮಾಣವಾಯಿತು. ಇದು ಊರಿನ ಹಲವಾರು ಮಂದಿಯ ಕಷ್ಟದ ಪ್ರತಿಫಲ. ಬೆಳೆದು ದೊಡ್ಡದಾದ ಮರ ಅದರ ಬೇರನ್ನು ನೆನಪಿಟ್ಟುಕೊಳ್ಳೋದನ್ನು ಕಲಿಯಬೇಕು ಅಂತ ಮಾತ್ರ ನಾನು ಹೇಳಬಲ್ಲೆ.”

ಆ ಮಾತು ಮಕ್ಕಳ ಹೃದಯಕ್ಕೆ ಬಿತ್ತು. ಆದರೆ ಸಮಾಜಕ್ಕೆ?

ಆ ವಾರದ ನಂತರ, ಮತ್ತೆ ಹೊಸ ಸುದ್ದಿಗಳು, ಹೊಸ ವಿಷಯಗಳು. ಶರ್ಮರ ಹೆಸರು ಮತ್ತೆ ನಿಧಾನವಾಗಿ ಹಿನ್ನೋಟಕ್ಕೆ ಸರಿಯತೊಡಗಿತು. ಶರ್ಮರು ಅದನ್ನೂ ನೋಡಿದರು. ಮೌನವಾಗಿ ಒಪ್ಪಿಕೊಂಡರು. ಊರು ಬೆಳೆಯುತ್ತಲೇ ಇತ್ತು. ಶಾಲೆ ಮುಂದುವರಿಯುತ್ತಲೇ ಇತ್ತು. ಆದರೆ, ಒಂದು ಊರು ತನ್ನ ಬೇರುಗಳನ್ನು ನೆನಪಿಟ್ಟುಕೊಳ್ಳುವ ತನಕ, ಆ ಬೆಳವಣಿಗೆ ಕೇವಲ ಕಟ್ಟಡಗಳದ್ದೇ ಹೊರತು ಮೌಲ್ಯಗಳದ್ದಾಗುವುದಿಲ್ಲ ಎಂಬ ಸತ್ಯ ಮತ್ತೆ ಮಣ್ಣಿನಲ್ಲಿ ಮರೆತುಹೋಯಿತು.

ಇದು ಶರ್ಮರ ಕಥೆಯ ಅಂತ್ಯ ಅಲ್ಲ. ಇದು, ಒಳ್ಳೆಯತನವನ್ನು ಉಪಯೋಗಿಸಿ ನೆನಪುಗಳನ್ನು ಮರೆತ ಸಮಾಜದ ಕಥೆ. ಇತಿಹಾಸವನ್ನು ಬರೆಯದ ಸಮಾಜದಲ್ಲಿ, ಒಳ್ಳೆಯವರು ಸದಾ ಮೌನದೊಳಗೆ ಸಮಾಧಿಯಾಗುತ್ತಾರೆ  ಸಮಾಜಕ್ಕೆ ನೆನಪಿಡಲು ಸುಲಭವಾಗಿರೋದು ಹೆಸರುಗಳು ಅಲ್ಲ. ಫಲವನ್ನು ಹಂಚಿಕೊಳ್ಳುವ ಸಮಾಜಕ್ಕೆ, ಬೇರುಗಳನ್ನು ನೆನಪಿಡುವ ಶಿಸ್ತು ಇಲ್ಲ. ಅದಕ್ಕೇ ಮೌಲ್ಯಗಳಿಲ್ಲದ ಕಟ್ಟಡಗಳು ಮಾತ್ರ ಬೆಳೆಯುತ್ತವೆ.

ಇಲ್ಲಿ, ಒಂದು ಪ್ರಶ್ನೆ ಮಾತ್ರ ಉಳಿಯುತ್ತದೆ— " ಒಂದು ಊರು ತನ್ನ ಬೇರುಗಳನ್ನು ಮರೆತರೆ, ಆ ಊರು ಬೆಳೆಯುತ್ತದಾ? ಅಥವಾ ನೆನಪುಗಳಿಲ್ಲದ ಮರವಾಗಿ ಒಣಗುತ್ತದಾ?"

***  

✍🏻 Deepalaxmi Bhat
Mangaluru